Belagavi News:
ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ಪ್ರಕರಣವನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಒತ್ತಾಯ ತೀವ್ರಗೊಳಿಸಿವೆ. ಸಂಸತ್ ಅಧಿವೇಶನದ ನಡುವೆಯೇ ಇಂಡಿ ಒಕ್ಕೂಟದ ಸಂಸದರು ಮತ್ತು ಕಾಂಗ್ರೆಸ್ ಸದಸ್ಯರು ಸಂಸತ್ ಭವನದ ಮಕರ ದ್ವಾರದಲ್ಲಿ ಧರಣಿ ನಡೆಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಕುರಿತು ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿರುವ ವಿಪಕ್ಷಗಳು, ಈ ವಿಚಾರದಲ್ಲಿ ಹೊಣೆಗಾರಿಕೆ ನಿಗದಿಪಡಿಸಬೇಕು ಎಂದು ಒತ್ತಾಯಿಸುತ್ತಿವೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಲೋಕಸಭೆಗೆ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು. ಇದೆ ವೇಳೆ, ಬಿಜೆಪಿ ತನ್ನ ಸಂಸದರಿಗೆ ಸದನದಲ್ಲಿ ಹಾಜರಿರುವಂತೆ ಸೂಚನೆ ನೀಡಿದೆ.
ಇನ್ನೊಂದೆಡೆ, ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ದೇಶದ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು ನೀಟ್ ಅಕ್ರಮದ ವಿರುದ್ಧ ಧ್ವನಿ ಎತ್ತುತ್ತಿದ್ದು, ನ್ಯಾಯಯುತ ತನಿಖೆ ಮತ್ತು ಅಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.
ಜಂತರ್ ಮಂತರ್ ಗೆ ತೆರಳಲು ಮೆಟ್ರೋ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೇರಿರುವ ದೃಶ್ಯಗಳು ಕಂಡುಬಂದಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ.
ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದು, ಇತ್ತೀಚಿಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಇಂಡಿ ಒಕ್ಕೂಟದ ಸಂಸದರ ಸಭೆಯ ಬಳಿಕ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ರಾಹುಲ್ ಗಾಂಧಿ ಗಾಂಧಿ ಸ್ಮೃತಿಗೆ ಭೇಟಿ ನೀಡಿದ ಅಹಿಂಸಾತ್ಮಕ ಹೋರಾಟದ ಸಂದೇಶ ನೀಡಿದ್ದರು.
ನೀಟ್ ಅಕ್ರಮ ಪ್ರಕರಣ ಇದೀಗ ಸಂಸತ್ ಅಧಿವೇಶನದಲ್ಲೂ ಪ್ರಮುಖ ರಾಜಕೀಯ ವಿಚಾರವಾಗಿ ಪರಿಣಮಿಸಿದ್ದು, ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ಮುಂದುವರಿದಿದೆ.