Belagavi News:
ಬೆಂಗಳೂರು: ಇನ್ಮುಂದೆ ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಹೊಸ ಕ್ರಮದ ಮೂಲಕ ನಾಡಪ್ರಭು ಕೆಂಪೇಗೌಡರ ಕೊಡುಗೆಗಳನ್ನು ಜನಸಾಮಾನ್ಯರಿಗೆ ಇನ್ನಷ್ಟು ಹತ್ತಿರವಾಗಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಅದೇ ವೇಳೆ ಟ್ರಂಪೆಟ್ ಸರ್ಕಲ್ ಬಳಿ ಕೆಂಪೇಗೌಡರ ಗುರುತನ್ನು ಪ್ರತಿಬಿಂಬಿಸುವ ಮತ್ತೊಂದು ಪ್ರತಿಮೆಯನ್ನು ಸ್ಥಾಪಿಸುವ ಕುರಿತು ಸರ್ಕಾರದಲ್ಲಿ ಚಿಂತನೆ ನಡೆಯುತ್ತಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಕ್ರಮಗಳು ಬೆಂಗಳೂರಿನ ಇತಿಹಾಸ ಹಾಗೂ ಕೆಂಪೇಗೌಡರ ಪರಂಪರೆಯನ್ನು ಮತ್ತಷ್ಟು ವ್ಯಾಪಕವಾಗಿ ಜನರಿಗೆ ತಲುಪಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ಇನ್ನು ಮುಂದೆ ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮತ್ತು ಫ್ರೀಡಂ ಪಾರ್ಕ್ ಗೆ ಸೀಮಿತಗೊಳಿಸದೆ, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ವರ್ಷಕ್ಕೊಂದು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು.
ಈ ವರ್ಷ ಯಶವಂತಪುರ್ ವಿಧಾನಸಭಾ ಕ್ಷೇತ್ರದ ಕೆಂಪೇಗೌಡ ಲೇಔಟ್ ನಲ್ಲಿ ಜಯಂತಿ ಆಚರಣೆ ಆರಂಭವಾಗಿದ್ದು, ಮುಂದಿನ 28 ವರ್ಷಗಳ ಕಾಲ ಪ್ರತಿ ವರ್ಷ ಬೇರೆ ಬೇರೆ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ತಿಳಿಸಲಾಗಿದೆ.
ಈ ವರ್ಷ ಕ್ರಮದ ಮೂಲಕ ನಾಡಪ್ರಭು ಕೆಂಪೇಗೌಡರ ಕೊಡುಗೆಗಳನ್ನು ನಗರದೆಲ್ಲೆಡೆ ಜನರಿಗೆ ಪರಿಚಯಿಸುವ ಹಾಗೂ ಅವರ ಪರಂಪರೆಯನ್ನು ವ್ಯಾಪಕವಾಗಿ ಆಚರಿಸುವ ಉದ್ದೇಶ ಹೊಂದಲಾಗಿದೆ.
ಜಿಬಿಎ ( ಗ್ರೇಟರ್ ಬೆಂಗಳೂರು ಪ್ರಾಧಿಕಾರ) ವತಿಯಿಂದ ಈ ಕಾರ್ಯಕ್ರಮಕ್ಕೆ ಹಣಕಾಸಿನ ವ್ಯವಸ್ಥೆ ಮಾಡಲಾಗಿದ್ದು ಇಡೀ ರಾಜ್ಯದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ನಾಡಪ್ರಭು ಕೆಂಪೇಗೌಡರ ಆಚಾರ-ವಿಚಾರಗಳನ್ನು ಅಳವಡಿಸಿಕೊಂಡು ಬೆಂಗಳೂರಿನ ಹೊಸ ರೂಪ ನೀಡುವ ಚಿಂತನೆ ಸರ್ಕಾರದ ಮುಂದಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಮೂಲಕ ಕೆಂಪೇಗೌಡರ ಪರಂಪರೆ ಮತ್ತು ಅವರ ದೂರದೃಷ್ಟಿಯ ನಗರ ಯೋಜನಾ ಚಿಂತನೆಗಳನ್ನು ರಾಜ್ಯದಾದ್ಯಂತ ಜನರಿಗೆ ಪರಿಚಯಿಸುವ ಉದ್ದೇಶ ಹೊಂದಲಾಗಿದೆ.
Also Read:
"ಅಯೋಗ್ಯ 2 " ಮ್ಯೂಸಿಕ್ ರಿಲೀಸ್ : ಡ್ಯಾನ್ಸ್ ನೋಡಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ