Belagavi News:
ಗುವಾಹಟಿ: ಭೀಕರ ಪ್ರವಾಹದಿಂದ ತತ್ತರಿಸಿರುವ ಅಸ್ಸಾಂ ರಾಜ್ಯದ ಸಂತ್ರಸ್ತರಿಗೆ ನೆರವು ನೀಡಲು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬಿಜೆಪಿ ಕಾರ್ಯಕರ್ತರಿಗೆ ವಿಶೇಷ ಕರೆ ನೀಡಿದ್ದಾರೆ. ಪ್ರವಾಹ ಪರಿಹಾರಗಳಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಬಿಜೆಪಿ ₹12 ಕೋಟಿ ನಿಧಿ ಸಂಗ್ರಹಿಸುವ ಮಹತ್ವಾಕಾಂಕ್ಷಿ ಗುರಿ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಸಂಗ್ರಹವಾಗುವ ದೇಣಿಗೆಯನ್ನು ಪ್ರವಾಹದಿಂದ ಸಂಕಷ್ಟಕ್ಕೀಡಾದ ಮಹಿಳೆಯರು ಮತ್ತು ಮಕ್ಕಳಿಗೆ ಬಟ್ಟೆ ಹಾಗೂ ಅಗತ್ಯ ಪರಿಹಾರ ಸಾಮಗ್ರಿಗಳನ್ನು ವಿತರಿಸಲು ಬಳಸಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ. ಅಭಿಯಾನದ ಮೂಲಕ ಸುಮಾರು 2ಲಕ್ಷ ಮಹಿಳೆಯರು ಮತ್ತು 2ಲಕ್ಷ ಮಕ್ಕಳಿಗೆ ನೆರವು ತಲುಪಿಸುವ ಯೋಜನೆ ರೂಪಿಸಲಾಗಿದೆ.
ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಬೆಂಬಲಿಗರು ಈ ಮಾನವೀಯ ಕಾರ್ಯಕ್ಕೆ ಕೈಜೋಡಿಸುವಂತೆ ಮನವಿ ಮಾಡಿರುವ ಸಿಎಂ, ₹2,000ಕ್ಕಿಂತ ಕಡಿಮೆ ಮೊತ್ತದ ದೇಣಿಗೆಯನ್ನು ಸ್ಥಳೀಯ ಶಾಸಕರ ಮೂಲಕ ನೀಡಬಹುದಾಗಿದ್ದು, ಅದಕ್ಕಿಂತ ಹೆಚ್ಚಿನ ಮೊತ್ತವನ್ನು ಬಿಜೆಪಿ ಅಧಿಕೃತ ಬ್ಯಾಂಕ್ ಖಾತೆಗೆ ಜಮಾ ಮಾಡಬಹುದು ಎಂದು ತಿಳಿಸಿದ್ದಾರೆ.
ಅಸ್ಸಾಂ ಪ್ರವಾಹ ಪರಿಸ್ಥಿತಿಯಲ್ಲಿ ಭಾಗಶಃ ಸುಧಾರಣೆ
ಕಳೆದ ಎರಡು ದಿನಗಳಿಂದ ಕೆಲವು ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವ ಕಾರಣ ನೀರಿನ ಮಟ್ಟ ಇಳಿಕೆಯಾಗಲು ಆರಂಭವಾಗಿದೆ. ಆದರೂ ಅಸ್ಸಾಂನ ಐದು ಜಿಲ್ಲೆಗಳಿಲ್ಲಿ ಇನ್ನೂ 5.24 ಲಕ್ಷಕ್ಕೋ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟದಲ್ಲಿದ್ದಾರೆ.
ಸರ್ಕಾರದ ಅಧಿಕೃತ ಮಾಹಿತಿಯ ಪ್ರಕಾರ, ಸಂಬಂಧಿತ ಘಟನೆಗಳಲ್ಲಿ ಇದುವರೆಗೆ 68ಮಂದಿ ಮೃತಪಟ್ಟಿದ್ದಾರೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ವರದೀಪ್ ಪ್ರಕಾರ, ಚರೈದೇವ್, ಗೋಲಾಘಾಟ್, ಜೋರಹಾಟ್, ನಾಗಾಂವ್ ಹಾಗೂ ಶಿವಸಾಗರ್ ಜಿಲ್ಲೆಗಳು ತೀವ್ರವಾಗಿ ಬಾದೀತವಾಗಿದ್ದು, ಚರೈದೇವ್ ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಚರೈದೇವ್ ಜಿಲ್ಲೆಗೆ ಅತಿಹೆಚ್ಚು ಹಾನಿ
ಪ್ರವಾಹದಿಂದ ಅತಿಹೆಚ್ಚು ಹಾನಿಗೊಳಗಾದ ಚರೈದೇವ್ ಜಿಲ್ಲೆಯಲ್ಲಿ ಸುಮಾರು 1.9ಲಕ್ಷ ಜನರು ಸಂತ್ರಸ್ತರಾಗಿದ್ದಾರೆ. ಶಿವಸಾಗರ್ ನಲ್ಲಿ 1.5ಲಕ್ಷಕ್ಕೂ ಹೆಚ್ಚು ಹಾಗೂ ಜೋರಹಾಟ್ ನಲ್ಲಿ ಸುಮಾರು 1.4ಲಕ್ಷ ಜನರು ಪ್ರವಾಹದ ಸಂಕಷ್ಟ ಎದುರಿಸುತ್ತಿದ್ದಾರೆ. ಒಟ್ಟಾರೆ ಆರು ಜಿಲ್ಲೆಗಳಲ್ಲಿ ಸುಮಾರು 6.55 ಲಕ್ಷ ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ.
ಪರಿಹಾರ ಮತ್ತು ರಕ್ಷಣಾ ಕಾರ್ಯ ಭರದಿಂದ
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಡಳಿತವು 354 ಪರಿಹಾರ ಶಿಬಿರಗಳು ಮತ್ತು ನೆರವು ವಿತರಣಾ ಕೇಂದ್ರಗಳನ್ನು ನಡೆಸುತ್ತಿದ್ದು. ಸುಮಾರು 37,724 ಸಂತ್ರಸ್ತರಿಗೆ ಆಶ್ರಯ ಮತ್ತು ನೆರವು ಒದಗಿಸಲಾಗುತ್ತಿದೆ.
ಸೇನೆ, ಎನ್ ಡಿಆರ್ ಎಫ್(NDRF), ಎಸ್ ಡಿಆರ್ ಎಫ್(SDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹಾಗೂ ಪೊಲೀಸ್ ಇಲಾಖೆ ರಕ್ಷಣಾ ಕಾರ್ಯಚರಣೆಯಲ್ಲಿ ನಿರಂತರವಾಗಿ ತೊಡಗಿಕೊಂಡಿವೆ. ಪುವಾಹಪೀಡಿತ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಮರುಸ್ಥಾಪನೆ ಕಾರ್ಯವೂ ವೇಗವಾಗಿ ನಡೆಯುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
ಇದೇ ವೇಳೆ, ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲವಿದ್ದು, ಅಗತ್ಯ ನೆರವು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.